ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ-2021 ರ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತರಬೇತಿ ಕೇಂದ್ರಗಳಿಗೆ ಸೋಮವಾರ (ಆ.30) ಭೇಟಿ ನೀಡಿ ಅವರು ಮಾತನಾಡಿದರು.
ಮತಯಂತ್ರ ಬಳಕೆ, ಮತದಾರರ ಪಟ್ಟಿ ಪರಿಶೀಲನೆ ಹಾಗೂ ಮತದಾನ ಪ್ರಕ್ರಿಯೆ ಕುರಿತು ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನುರಿತ ತರಬೇತುದಾರರಿಂದ ತರಬೇತಿಯನ್ನು ನೀಡಲಾಗುತ್ತಿದೆ.
ಯಾವುದೇ ಸಂದೇಹಗಳಿದ್ದರೆ ತರಬೇತಿ ಅವಧಿಯಲ್ಲಿ ಪರಹರಿಸಿಕೊಳ್ಳಬೇಕು. ಚುನಾವಣೆ ಸಂದರ್ಭದಲ್ಲಿ ಅನಗತ್ಯ ಗೊಂದಲ ಮಾಡಿಕೊಳ್ಳಬಾರದು ಎಂದು ತಿಳಿಸಿದರು.
ಈಗಾಗಲೇ ಹಲವು ಸುತ್ತಿನ ತರಬೇತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಆದಾಗ್ಯೂ ಏನೇ ಸಂದೇಹ ಅಥವಾ ಸಮಸ್ಯೆಗಳಿದ್ದರೆ ಹಿರಿಯ ಅಧಿಕಾರಿಗಳು ಅಥವಾ ತರಬೇತುದಾರರಿಂದ ಸಲಹೆಗಳನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
- Advertisement -
ಚುನಾವಣಾ ಸಿಬ್ಬಂದಿ ತರಬೇತಿ ಕೇಂದ್ರಗಳಾಗಿರುವ ಸೇಂಟ್ ಜೋಸೆಫ್, ಸೇಂಟ್ ಪೌಲ್ ಹಾಗೂ ಸೇಂಟ್ ಮೇರಿ ಶಾಲೆಗಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಭೇಟಿ ನೀಡಿ ಪರಿಶೀಲಿಸಿದರು.
ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಲಕ್ಷ್ಮೀ ನಿಪ್ಪಾಣಿಕರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.